ಬೆಂಗಳೂರು: ನವೆಂಬರ್ 1 ರ ಒಳಗಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಐದು ಪಾಲಿಕೆಗಳ ಚುನಾವಣೆ ಪೂರ್ವಸಿದ್ಧತೆ ಮಾಡಲಾಗುವುದು. ನೋಂದಣಿ ನಿಯಮಗಳನ್ನು ಯಾವ ರೀತಿ ರೂಪಿಸಬೇಕು ಎಂಬ ಬಗ್ಗೆ ಚುನಾವಣಾ ಆಯೋಗದ ಅಭಿಪ್ರಾಯ ಕೇಳಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ
ಮುಖಂಡರ ಸಭೆಯ ನಂತರ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.ಚುನಾವಣೆಯ ಮತದಾನದ ಹಕ್ಕನ್ನು ಹೇಗೆ ಕಾಪಾಡಿಕೊಳ್ಳಬೇಕು ಎಂದು ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಿದ್ದೇವೆ. ಬ್ಲಾಕ್ ಅಧ್ಯಕ್ಷರು ಹಾಗೂ ಶಾಸಕರನ್ನು ಕರೆದು ಮತ್ತೊಂದು ಸುತ್ತಿನ ಸಭೆ ನಡೆಸಲಾಗುವುದು” ಎಂದರು.
ಮುಖ್ಯಮಂತ್ರಿಯವರು ಇಂಡಿಯಾ ಒಕ್ಕೂಟ ಸಭೆಗೆ ತೆರಳುತ್ತಿರುವ ಬಗ್ಗೆ ಕೇಳಿದಾಗ, “ಇಂಡಿಯಾ ಒಕ್ಕೂಟದ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಗೆ ಆಹ್ವಾನ ಬಂದಿದೆ. ನಾನು ಇಲ್ಲಿ ಪ್ರತಿಭಟನೆ ಸಭೆ ಸಿದ್ಧತೆಯ ಉಸ್ತುವಾರಿ ನೋಡಬೇಕು. ಅದಕ್ಕಾಗಿ ಇಲ್ಲೇ ಇರುತ್ತೇನೆ” ಎಂದರು.
“ಪ್ರತಿಯೊಂದು ಸಂದರ್ಭದಲ್ಲಿ ಬೆಂಗಳೂರು ಮತ್ತು ಕರ್ನಾಟಕ ಈ ದೇಶಕ್ಕೆ ಪ್ರಬಲ ಸಂದೇಶವನ್ನು ನೀಡಿವೆ. ಇಂಡಿಯಾ ಒಕ್ಕೂಟ ಸಹ ಜನ್ಮ ತಳೆದಿದ್ದು ಬೆಂಗಳೂರಿನಲ್ಲಿ. ಕೋರ್ಟ್ ಆದೇಶ ಪಾಲನೆ ಮಾಡಬೇಕು ಎಂದು ಐತಿಹಾಸಿಕ ಸ್ಥಳವಾದ ಸ್ವಾತಂತ್ರ ಉದ್ಯಾನದಲ್ಲಿ ಮತಗಳ್ಳತನದ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ” ಎಂದರು.
“ಸಚಿವರು, ಶಾಸಕರು ಹಾಗೂ ಪರಾಜಿತ ಅಭ್ಯರ್ಥಿಗಳು ಸೇರಿದಂತೆ ಬೆಂಗಳೂರು ಹೊರತುಪಡಿಸಿ ಪ್ರತಿ ಜಿಲ್ಲೆಯಿಂದ 50 ಜನ ಕಾರ್ಯಕರ್ತರು ಹಾಗೂ ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದ್ದೇವೆ” ಎಂದರು.
ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಕೈ ಪಾಳಯ ಆಗಸ್ಟ್ 8 ಧರಣಿ
ಕೇಂದ್ರ ಚುನಾವಣೆ ಆಯೋಗ ಪ್ರಾಯೋಜಿತ ಮತ ಅಕ್ರಮದ ವಿರುದ್ಧ ಆಗಸ್ಟ್ 8 ರಂದು ಬೆಂಗಳೂರಲ್ಲಿ ಆಯೋಜಿಸಿರುವ ಪ್ರತಿಭಟನಾ ಸಭೆ ಹಿನ್ನೆಲೆಯಲ್ಲಿ ಕೆಪಿಸಿಸಿಯ ಭಾರತ್ ಜೋಡೋ ಭವನದಲ್ಲಿ ಬುಧವಾರ ನಡೆದ ಶಾಸಕರು, ಸಂಸದರು, ಪದಾಧಿಕಾರಿಗಳು, ಮುಖಂಡರನ್ನು ಒಳಗೊಂಡ ಪೂರ್ವಸಿದ್ಧತಾ ಸಭೆ ನಡೆಸಲಾಯಿತು.
ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಸೊರಕೆ, ಸಚಿವರಾದ ಎಚ್ ಕೆ ಪಾಟೀಲ್, ಕೆ ಜೆ ಜಾರ್ಜ್, ಕೆ ಎಚ್ ಮುನಿಯಪ್ಪ, ದಿನೇಶ್ ಗುಂಡೂರಾವ್, ರಾಮಲಿಂಗರೆಡ್ಡಿ, ಕೃಷ್ಣ ಬೈರೇಗೌಡ, ಡಾ ಶರಣ್ ಪ್ರಕಾಶ್ ಪಾಟೀಲ್, ವೆಂಕಟೇಶ್, ಬೋಸರಾಜ್, ಡಾ ಎಂ ಸಿ ಸುಧಾಕರ್, ಜಮೀರ್ ಅಹಮದ್ ಖಾನ್, ಬೈರತಿ ಸುರೇಶ್, ರಹೀಮ್ ಖಾನ್, ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್, ದೆಹಲಿಯಲ್ಲಿ ಕರ್ನಾಟಕದ ವಿಶೇಷ ಪ್ರತಿನಿಧಿ ಟಿ ಬಿ ಜಯಚಂದ್ರ ಮತ್ತಿತರರು ಉಪಸ್ಥಿತರಿದ್ದರು.