ಕೆ.ಆರ್.ನಗರ / ಬೆಂಗಳೂರು : ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಜನರೇ ಮಾಲೀಕರು. ಕ್ಷೇತ್ರಗಳ ಅಭಿವೃದ್ಧಿ, ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದು ಸರ್ಕಾರದ ಹಾಗೂ ಶಾಸಕರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಕೆ.ಆರ್. ನಗರ ವಿಧಾನಸಭಾ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಕೆ.ಆರ್. ನಗರ ವಿಧಾನಸಭಾ ಕ್ಷೇತ್ರಕ್ಕೆ 404 ಕೋಟಿ ರೂ.ಗಳ ಶಂಕುಸ್ಥಾಪನೆ, 109 ಕೋಟಿ ರೂ.ಗಳ ವೆಚ್ಚದ ಕಾಮಗಾರಿಗಳ ಉದ್ಘಾಟನೆ ಸೇರಿ ಒಟ್ಟು 513 ಕೋಟಿ ರೂ.ಗಳ ವೆಚ್ಚದ ಕಾಮಗಾರಿಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿದ್ದು, ಇದಕ್ಕೆ ಸ್ಥಳೀಯ ಶಾಸಕರಾದ ರವಿಶಂಕರ್ ಕಾರಣ ಎಂದು ತಿಳಿಸಿದರು.
ಸಣ್ಣ ನೀರಾವರಿ ಸಚಿವರು 197 ಕೋಟಿ ರೂ.ಗಳ ವೆಚ್ಚದ ಶಂಕುಸ್ಥಾಪನೆ ಮತ್ತು ಉದ್ಘಾಟನೆಯನ್ನು ತಮ್ಮ ಇಲಾಖೆಯೊಂದರಲ್ಲಿಯೇ ಮಾಡಿದ್ದಾರೆ. ಆರೋಗ್ಯ ಇಲಾಖೆಯಡಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ನೆರವೇರಿದೆ ಎಂದರು.
ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದರಿಂದ ಅಭಿವೃದ್ಧಿ ಕಾರ್ಯಗಳಿಗೆ ಈ ಸರ್ಕಾರದ ಬಳಿ ಹಣವಿಲ್ಲ ಎಂದು ವಿರೋಧ ಪಕ್ಷದವರು ಟೀಕಿಸುತ್ತಾರೆ. ಹಣ ಇಲ್ಲದಿದ್ದರೆ ಸರ್ಕಾರವು 513 ಕೋಟಿ ರೂ.ಗಳ ಕಾಮಗಾರಿಗಳನ್ನು ಇಲ್ಲಿ ಕೈಗೊಳ್ಳಲು ಸಾಧ್ಯವಾಗುತ್ತಿತ್ತೇ ಎಂದು ಪ್ರಶ್ನಿಸಿದರು.
ಪಂಚ ಗ್ಯಾರಂಟಿ ಯೋಜನೆಗಳನ್ನು ನಮ್ಮ ಸರ್ಕಾರ ಜಾರಿ ಮಾಡಿದೆ. ಜನರು ಈ ಯೋಜನೆಗಳ ಸದುಪಯೋಗಪಡಿಸಿಕೊಳ್ಳುತ್ತಿರುವಾಗ ಸುಳ್ಳು ಎಂದು ವಿರೋಧ ಪಕ್ಷದವರು ಹೇಗೆ ಹೇಳುತ್ತಾರೆ ಎಂದರು.

ರಾಜ್ಯದ 3.50 ಕೋಟಿ ಮಹಿಳೆಯರು ಯಾವುದೇ ಬೇಧ ಭಾವವಿಲ್ಲದೇ ಶಕ್ತಿ ಯೋಜನೆಯನ್ನು ಬಳಸಿಕೊಂಡಿದ್ದಾರೆ. ಈವರೆಗೆ 500 ಕೋಟಿ ಮಹಿಳೆಯರು ಉಚಿತವಾಗಿ ಓಡಾಡಿದ್ದಾರೆ. ಪ್ರತಿ ದಿನ 50-60 ಲಕ್ಷ ಮಹಿಳೆಯರು ಇದರ ಪ್ರಯೋಜನ ಪಡೆಯುತ್ತಿದ್ದಾರೆ ಎಂದರು.
ಜಿಎಸ್ ಟಿ ಸಂಗ್ರಹಣೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಮುಂದಿನ ವರ್ಷ ನಾವು ಮೊದಲ ಸ್ಥಾನಕ್ಕೆ ಬರುವ ಪ್ರಯತ್ನ ಮಾಡುತ್ತೇವೆ ಎಂದ ಮುಖ್ಯಮಂತ್ರಿಗಳು, ಕಬಿನಿ ಸೇತುವೆಗೆ 25 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗಿದೆ. ಚುಂಚನಕಟ್ಟೆ ಶ್ರೀರಾಮ ಸಕ್ಕರೆ ಕಾರ್ಖಾನೆಯನ್ನು 40 ವರ್ಷಗಳ ಅವಧಿಗೆ ಗುತ್ತಿಗೆ ನೀಡಲಾಗಿದೆ. ಸಾಗರಕಟ್ಟೆ ಸೇತುವೆ, ರಸ್ತೆ ಅಗಲೀಕರಣ ಕಾಮಗಾರಿಗಳಿಗೆ ಅನುದಾನ ಒದಗಿಸಲಾಗಿದೆ. ಎಲ್ಲರೂ ಒಂದೇ ತಾಯಿಯ ಮಕ್ಕಳಂತೆ ಇರಬೇಕೆಂಬುದು ಸರ್ಕಾರದ ಆಶಯ ಎಂದರು.
ಶಕ್ತಿ ಯೋಜನೆಯಿಂದ ಧರ್ಮಸ್ಥಳ ಕ್ಷೇತ್ರಕ್ಕೆ ಭಕ್ತಾದಿಗಳ ಸಂಖ್ಯೆ ಹೆಚ್ಚಾಗಿರುವುದನ್ನು ಪ್ರಶಂಸಿಸಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಪತ್ರ ಬರೆದಿದ್ದರು. ಗ್ಯಾರಂಟಿ ಯೋಜನೆಗಳು ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಇತ್ತೀಚೆಗೆ ಹೊಸಪೇಟೆಯಲ್ಲಿ ನಡೆದ ಸರ್ಕಾರದ ಎರಡು ವರ್ಷದ ಕಾರ್ಯಕ್ರಮ ಯಶಸ್ವಿಯಾಗಿ ನಡೆದು, ಸುಮಾರು 3 ರಿಂದ 4 ಲಕ್ಷ ಜನ ಆಗಮಿಸಿದ್ದರು. ಆದರೆ ವಿರೋಧ ಪಕ್ಷದವರು ಜನಾಕ್ರೋಶ ಕಾರ್ಯಕ್ರಮ ಮಾಡಿ, ಅಭಿವೃದ್ಧಿ ನಡೆಯುತ್ತಿಲ್ಲ, ಬೆಲೆ ಏರಿಕೆಯಾಗಿದೆ ಎಂಬ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ವಿರೋಧ ಪಕ್ಷದವರು ತಮ್ಮ ಅಧಿಕಾರಾವಧಿಯಲ್ಲಿ ಯಾವ ಕೆಲಸವನ್ನೂ ಮಾಡದೇ, ನಮ್ಮ ಸರ್ಕಾರದ ಯಶಸ್ಸಿಗೆ ಮರುಗುತ್ತಿದ್ದಾರೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಶಕ್ತಿ ಯೋಜನೆ, ನಂತರ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಅನ್ನಭಾಗ್ಯ, ಗೃಹಜ್ಯೋತಿ ಹಾಗೂ ಗೃಹಲಕ್ಷ್ಮಿ ಯೋಜನೆಗಳನ್ನು ಜಾರಿಗೆ ತರಲಾಯಿತು. ತದನಂತರ ಜನವರಿ 2024 ರಲ್ಲಿ ಯುವನಿಧಿಯನ್ನು ಜಾರಿಗೊಳಿಸಲಾಗಿದ್ದು, ಇದಕ್ಕಾಗಿ 52000 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ ಎಂದರು.
ನುಡಿದಂತೆ ನಡೆದ ಸರ್ಕಾರದ ಮೇಲೆ ಜನರ ವಿಶ್ವಾಸ:
ಇದುವರೆಗೆ ಗ್ಯಾರಂಟಿಗಳಿಗೆ 90 ಸಾವಿರ ಕೋಟಿ ರೂ.ಗಳು ವೆಚ್ಚವಾಗಿದೆ. 60 ಸಾವಿರ ಕೋಟಿ ರೂ.ಗಳಿಗೆ ವಿವಿಧ ಪಿಂಚಣಿಗಳು, 7 ನೇ ವೇತನ ಆಯೋಗ, ವಿದ್ಯುತ್ ಸಬ್ಸಿಡಿ ಸೇರಿದಂತೆ ವಿವಿಧ ಜನೋಪಯೋಗಿ ಯೋಜನೆಗಳಿಗೆ ಒಟ್ಟು 1.12 ಲಕ್ಷ ಕೋಟಿಗಳನ್ನು ವೆಚ್ಚಮಾಡಲಾಗಿದೆ. ರೂ.2.06 ಲಕ್ಷ ಕೋಟಿಗಳ ಸವಲತ್ತುಗಳನ್ನು ಕೃಷಿಯ ವಿವಿಧ ಯೋಜನೆಗಳಿಗೆ ನೀಡಲಾಗಿದೆ. ಮೈಸೂರು ಭಾಗದ ಕೃಷಿಕರು ಕೃಷಿಯನ್ನು ವೈಜ್ಞಾನಿಕವಾಗಿ ಮಾಡಬೇಕು. ಉತ್ತಮ ಯಂತ್ರೋಪಕರಣ, ಬೀಜ ಗೊಬ್ಬರ ನೀಡಲಾಗುತ್ತಿದೆ. ರೈತರು ಯಂತ್ರೋಪಕರಣ ಬಳಸಿ, ಉತ್ತಮ ರೀತಿಯಲ್ಲಿ ಬೆಳೆ ಬೆಳೆಯಬೇಕು. ಜನಾಕ್ರೋಶ ಕೇವಲ ರಾಜಕೀಯವಾಗಿಯೇ ಹೊರತು, ಜನರಲ್ಲಿ ಆಕ್ರೋಶ ಇಲ್ಲ. ನುಡಿದಂತೆ ನಡೆಯುವ ನಮ್ಮ ಸರ್ಕಾರದ ಮೇಲೆ ಜನರು ತಮ್ಮ ವಿಶ್ವಾಸವನ್ನು ತೋರಿದ್ದಾರೆ ಎಂದರು.
ಹಿಂದೆ ನಮ್ಮ ಸರ್ಕಾರ ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇವೆ. ಪ್ರಸ್ತುತ ನಮ್ಮ ಸರ್ಕಾರ 593 ಕಾರ್ಯಕ್ರಮಗಳನ್ನು ಪ್ರಣಾಳಿಕೆಯಲ್ಲಿ ತಿಳಿಸಿದ್ದು, 242 ಭರವಸೆಗಳನ್ನು ಈಡೇರಿಸಿದ್ದೇವೆ. ನಮ್ಮ ಸರ್ಕಾರ ಇನ್ನುಳಿದ ವರ್ಷಗಳಲ್ಲಿ ಉಳಿದ ಎಲ್ಲ ಭರವಸೆಗಳನ್ನೂ ಈಡೇರಿಸಲಿದೆ ಎಂದರು.
ಕೆ.ಆರ್.ನಗರದ ಶಾಸಕರು ಪ್ರಾಮಾಣಿಕರಾಗಿದ್ದು, ಕ್ಷೇತ್ರದ ಒಳಿತಿಗೆ ಶ್ರಮಿಸುತ್ತಿದ್ದಾರೆ. ಅವರನ್ನು ಮುಂದಿನ ಚುನಾವಣೆಯಲ್ಲಿ ಬೆಂಬಲಿಸಿ ಎಂದು ಜನರಲ್ಲಿ ಮುಖ್ಯಮಂತ್ರಿಗಳು ಮನವಿ ಮಾಡಿದರು. ಹಾಲಿನ ದರ ಏರಿಕೆಯಾಗಿದ್ದು, ಹೆಚ್ಚಿನ ಮೊತ್ತ ರೈತರಿಗೆ ತಲುಪುತ್ತಿದೆಯೇ ಹೊರತು, ಸರ್ಕಾರದ ಬೊಕ್ಕಸಕ್ಕೆ ಬರುತ್ತಿಲ್ಲ. ನೆರೆರಾಜ್ಯಗಳಿಗೆ ಹೋಲಿಸಿದರೆ, ಕರ್ನಾಟಕದಲ್ಲಿ ಹಾಲಿನ ದರ ಕಡಿಮೆಯಿದೆ. ವಿರೋಧ ಪಕ್ಷದವರು ಕೇಂದ್ರದಲ್ಲಿ ಹೆಚ್ಚಿಸಿರುವ ದರಗಳ ಬಗ್ಗೆ ಮಾತನಾಡುವುದಿಲ್ಲ. ಡೀಸೆಲ್ ಬೆಲೆ ಹಿಂದೆ ಇದ್ದ 46 ರೂ. ಇದ್ದ ಬೆಲೆ, ಈಗ 91 ರೂ.ಗಳಿಗೆ ಹೆಚ್ಚಳವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಉಸ್ತುವಾರಿ ಸಚಿವ ಡಾ: ಹೆಚ್.ಸಿ ಮಹದೇವಪ್ಪ, ಸಚಿವರಾದ ಕೆ.ವೆಂಕಟೇಶ್, ದಿನೇಶ್ ಗುಂಡೂರಾವ್, ಬೋಸರಾಜು, ಬೈರತಿ ಸುರೇಶ್, ಶಾಸಕರಾದ ರವಿಶಂಕರ್, ವಿಧಾನ ಪರಿಷತ್ ಸದಸ್ಯ ಡಾ: ತಿಮ್ಮಯ್ಯ, ಕೆ.ಆರ್.ನಗರ ಪುರಸಭೆ ಅಧ್ಯಕ್ಷ ಶಿವಕುಮಾರ್ ಮೊದಲಾದವರು ಉಪಸ್ಥಿತರಿದ್ದರು.