ಬೆಂಗಳೂರು: ಭೂಸ್ವಾಧೀನ ಹಾಗೂ ಟಿಡಿಆರ್ ಪ್ರಕ್ರಿಯೆಗಳು ಅಭಿವೃದ್ಧಿ ಕಾಮಗಾರಿಗಳಿಗೆ ಅಡ್ಡಿಯಾಗಬಾರದು– ಡಿ.ಎಸ್. ರಮೇಶ್ ಸೂಚನೆ ನೀಡಿದರು.
ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗುತ್ತಿರುವ ಪ್ರಸ್ತಾಪಿತ ಪ್ರಮುಖ ರಸ್ತೆಗಳ ಅಗಲೀಕರಣ, ರಸ್ತೆ ಅಭಿವೃದ್ಧಿ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಆಯುಕ್ತರಾದ ಡಿ.ಎಸ್. ರಮೇಶ್ ರವರು ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ಸ್ಥಳ ಪರಿಶೀಲನೆಯ ಸಂದರ್ಭದಲ್ಲಿ ವಿವಿಧ ಕಾಮಗಾರಿಗಳ ಪ್ರಸ್ತುತ ಸ್ಥಿತಿಗತಿ, ಭೂಸ್ವಾಧೀನ, ಟಿಡಿಆರ್, ಕಂದಾಯ ಸಂಬಂಧಿತ ಪ್ರಕ್ರಿಯೆಗಳು ಹಾಗೂ ವಿವಿಧ ಇಲಾಖೆಗಳೊಂದಿಗೆ ಕೈಗೊಳ್ಳಬೇಕಾದ ಸಮನ್ವಯದ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಬಾಕಿ ಇರುವ ಪ್ರಕ್ರಿಯೆಗಳನ್ನು ಯಾವುದೇ ವಿಳಂಬವಿಲ್ಲದೆ ತ್ವರಿತವಾಗಿ ಪೂರ್ಣಗೊಳಿಸಿ, ಕಾಮಗಾರಿಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
*ಅಥಶ್ರಿ ಅಪಾರ್ಟ್ಮೆಂಟ್, ವೈಟ್ಫೀಲ್ಡ್ – ಸಿ.ಡಿ.ಪಿ. 24 ಮೀಟರ್ ರಸ್ತೆ ಪರಿಶೀಲನೆ*
ವೈಟ್ಫೀಲ್ಡ್ನ ಅಥಶ್ರಿ ಅಪಾರ್ಟ್ಮೆಂಟ್ ಬಳಿ ಪ್ರಸ್ತಾಪಿತ ಸಿ.ಡಿ.ಪಿ. 24 ಮೀಟರ್ ಅಗಲದ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಆಯುಕ್ತರು ಸ್ಥಳ ಪರಿಶೀಲನೆ ನಡೆಸಿದರು. ಪ್ರಸ್ತಾಪಿತ ರಸ್ತೆ ನಿರ್ಮಾಣಕ್ಕೆ ಅಗತ್ಯವಿರುವ ಜಾಗ, ಭೂಸ್ವಾಧೀನ ಹಾಗೂ ಇತರ ಆಡಳಿತಾತ್ಮಕ ಮತ್ತು ತಾಂತ್ರಿಕ ಪ್ರಕ್ರಿಯೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು, ಬಾಕಿ ಇರುವ ಪ್ರಕ್ರಿಯೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚಿಸಿದರು ಪ್ರಸ್ತಾಪಿತ ರಸ್ತೆ ಜಾಗದಲ್ಲಿ ಯಾವುದೇ ಅನಧಿಕೃತ ಕಟ್ಟಡ ಅಥವಾ ನಿರ್ಮಾಣ ಚಟುವಟಿಕೆ ನಡೆಯದಂತೆ ಕಟ್ಟುನಿಟ್ಟಿನ ನಿಗಾ ವಹಿಸಬೇಕು. ರಸ್ತೆ ಅಭಿವೃದ್ಧಿಗೆ ಮೀಸಲಾದ ಜಾಗವನ್ನು ಸಂರಕ್ಷಿಸಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನಲ್ಲೂರಹಳ್ಳಿ ಮುಖ್ಯರಸ್ತೆಗೆ ಸಂಬಂಧಿಸಿದಂತೆ ಪ್ರಸ್ತಾಪಿತ 18 ಮೀಟರ್ ಸಿಡಿಪಿ ರಸ್ತೆ ಅಭಿವೃದ್ಧಿ ಹಾಗೂ ಅಗಲೀಕರಣದ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ, ಭೂಸ್ವಾಧೀನ ಸೇರಿದಂತೆ ಅಗತ್ಯ ಪ್ರಕ್ರಿಯೆಗಳ ಪ್ರಗತಿಯನ್ನು ಪರಿಶೀಲಿಸಿ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನ ನೀಡಿದರು.
ಇದೇ ಸಂದರ್ಭದಲ್ಲಿ ನಲ್ಲೂರಹಳ್ಳಿ ಮುಖ್ಯರಸ್ತೆಯಲ್ಲಿ ಕಸ ಸಂಗ್ರಹವಾಗಿರುವ ಬ್ಲ್ಯಾಕ್ ಸ್ಪಾಟ್ ತ್ಯಾಜ್ಯವನ್ನು ತಕ್ಷಣ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಮುಂದಿನ ದಿನಗಳಲ್ಲಿ ಈ ಸ್ಥಳದಲ್ಲಿ ಪುನಃ ತ್ಯಾಜ್ಯ ಸಂಗ್ರಹವಾಗದಂತೆ ನಿಯಮಿತ ಮೇಲ್ವಿಚಾರಣೆ ನಡೆಸಬೇಕು. ಅಗತ್ಯವಿರುವ ಕಡೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ, ನಿಯಮ ಉಲ್ಲಂಘಿಸುವವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
*ಗುಂಜೂರು ಟಿ ಜಂಕ್ಷನ್ – ಟಿಡಿಆರ್ ಮೂಲಕ ಜಾಗ ಪಡೆಯಿರಿ*
ಗುಂಜೂರು ಟಿ ಜಂಕ್ಷನ್ನಲ್ಲಿ ರಸ್ತೆ ಅಭಿವೃದ್ಧಿ ಹಾಗೂ ರಸ್ತೆ ಅಗಲೀಕರಣಕ್ಕೆ ಅಗತ್ಯವಿರುವ ಜಾಗ ಪಡೆಯುವ ಸಲುವಾಗಿ ಸ್ವತ್ತಿನ ಮಾಲೀಕರೊಂದಿಗೆ ಸಮಾಲೋಚನೆ ನಡೆಸಿ, ಸಮನ್ವಯ ಸಾಧಿಸುವ ಮೂಲಕ ನಿಯಮಾನುಸಾರ ಟಿಡಿಆರ್ ಮೂಲಕ ಅಗತ್ಯ ಜಾಗವನ್ನು ಪಡೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ರಸ್ತೆ ಅಭಿವೃದ್ಧಿಗೆ ಅಡ್ಡಿಯಾಗುವ ಮರಗಳಿದ್ದಲ್ಲಿ ಪರಿಸರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಸಾಧ್ಯವಾದಲ್ಲಿ ಅವುಗಳನ್ನು ಸೂಕ್ತ ಸ್ಥಳಕ್ಕೆ ಸ್ಥಳಾಂತರಿಸುವಂತೆ ತಿಳಿಸಿದರು. ರಸ್ತೆ ಅಭಿವೃದ್ಧಿ ಕಾಮಗಾರಿಯಿಂದ ಸಾರ್ವಜನಿಕರು ಹಾಗೂ ವಾಹನ ಸವಾರರಿಗೆ ತೊಂದರೆಯಾಗದಂತೆ ಸಂಚಾರ ನಿರ್ವಹಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.
ಇದೇ ವೇಳೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಗೆ ಸಂಬಂಧಿಸಿದ ಎಲ್ಲಾ ಬಾಕಿ ಕಾಮಗಾರಿಗಳನ್ನು ಸಹ ತ್ವರಿತವಾಗಿ ಪೂರ್ಣಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುವಂತೆ ನಿರ್ದೇಶನ ನೀಡಿದರು.
*ಗುಂಜೂರು ಕ್ಲಬ್ ರಸ್ತೆ ಮತ್ತು ಮಳೆನೀರು ಕಾಲುವೆ ಪರಿಶೀಲನೆ*
ಗುಂಜೂರು ಕ್ಲಬ್ ಬಳಿ ನಡೆಯುತ್ತಿರುವ ವೈಟ್ಟಾಪಿಂಗ್ ಕಾಮಗಾರಿ ವೇಗ ಹೆಚ್ಚಿಸಲು ಅಗತ್ಯ ಮಾನವ ಸಂಪನ್ಮೂಲ ಹಾಗೂ ಯಂತ್ರೋಪಕರಣಗಳನ್ನು ಸಮರ್ಪಕವಾಗಿ ನಿಯೋಜಿಸಿಕೊಂಡು ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸೈಡ್ ಡ್ರೈನ್ ಚೇಂಬರ್ಗಳನ್ನು ಸಮರ್ಪಕ ಗಾತ್ರದಲ್ಲಿ ಹಾಗೂ ವೈಜ್ಞಾನಿಕ ವಿನ್ಯಾಸದಲ್ಲಿ ನಿರ್ಮಿಸಬೇಕು ಎಂದು ಆಯುಕ್ತರು ಸೂಚಿಸಿದರು. ಚೇಂಬರ್ಗಳು ಸಣ್ಣದಾಗಿರುವುದರಿಂದ ಸ್ವಚ್ಛತೆ ಹಾಗೂ ಹೂಳು ತೆಗೆಯುವ ಕಾರ್ಯಗಳಿಗೆ ತೊಂದರೆಯಾಗದಂತೆ, ಅಗತ್ಯ ಗಾತ್ರ ಮತ್ತು ವಿನ್ಯಾಸದಲ್ಲಿ ಚೇಂಬರ್ಗಳನ್ನು ನಿರ್ಮಿಸಬೇಕು. ಮಳೆನೀರು ಸರಾಗವಾಗಿ ಹರಿಯಲು ಚರಂಡಿಗಳಲ್ಲಿ ಹೂಳು, ಕಸ ಹಾಗೂ ಇತರೆ ತ್ಯಾಜ್ಯ ಸಂಗ್ರಹವಾಗದಂತೆ ನಿಯಮಿತವಾಗಿ ಸ್ವಚ್ಛಗೊಳಿಸುವ ವ್ಯವಸ್ಥೆ ಕಲ್ಪಿಸಬೇಕು ಎಂದು ನಿರ್ದೇಶನ ನೀಡಿದರು.
*ಚಿಕ್ಕ ಬೆಳ್ಳಂದೂರು – ಪ್ರಸ್ತಾಪಿತ ರಸ್ತೆ ಅಭಿವೃದ್ಧಿ ಪರಿಶೀಲನೆ*
ಚಿಕ್ಕ ಬೆಳ್ಳಂದೂರಿನಲ್ಲಿ ಪ್ರಸ್ತಾಪಿತ 25 ಮೀಟರ್ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿದಂತೆ ಆಯುಕ್ತರು ಸ್ಥಳ ಪರಿಶೀಲನೆ ನಡೆಸಿದರು. ರಸ್ತೆ ನಿರ್ಮಾಣಕ್ಕೆ ಅಗತ್ಯವಿರುವ ಜಾಗ, ಭೂಸ್ವಾಧೀನ, ಟಿಡಿಆರ್ ಹಾಗೂ ಇತರ ಸಂಬಂಧಿತ ಪ್ರಕ್ರಿಯೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಬಾಕಿ ಇರುವ ಎಲ್ಲಾ ಪ್ರಕ್ರಿಯೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ವೇಗ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
*ಮುಳ್ಳೂರು – ಭೂಸ್ವಾಧೀನಕ್ಕೆ ಒಳಪಡುವ ಸ್ವತ್ತುಗಳ ಪರಿಶೀಲನೆ*
ಮುಳ್ಳೂರು ಪ್ರದೇಶದಲ್ಲಿ, ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ಹೊರಭಾಗದಲ್ಲಿರುವ ಮುಳ್ಳೂರು ಗ್ರಾಮ ಪಂಚಾಯಿತಿ ಪ್ರದೇಶಗಳಿಗೆ ಸಂಬಂಧಿಸಿದಂತೆ ಆಯುಕ್ತರು ಸ್ಥಳ ಪರಿಶೀಲನೆ ನಡೆಸಿದರು. ರಸ್ತೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಯ ಭಾಗವಾಗಿ ಭೂಸ್ವಾಧೀನಕ್ಕೆ ಒಳಪಡುವ ಸ್ವತ್ತುಗಳನ್ನು ಸ್ಥಳದಲ್ಲಿಯೇ ಪರಿಶೀಲಿಸಿ, ಸಂಬಂಧಪಟ್ಟ ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆದುಕೊಂಡರು.
ಭೂಸ್ವಾಧೀನ, ಟಿಡಿಆರ್, ಕಂದಾಯ ದಾಖಲೆಗಳು ಹಾಗೂ ಸಂಬಂಧಪಟ್ಟ ಇಲಾಖೆಗಳ ಅನುಮೋದನೆಗೆ ಸಂಬಂಧಿಸಿದ ಪ್ರಕ್ರಿಯೆಗಳಲ್ಲಿ ಯಾವುದೇ ವಿಳಂಬವಾಗದಂತೆ ಸಮನ್ವಯ ಸಾಧಿಸಿ ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳು ಭೂಸ್ವಾಧೀನ ಹಾಗೂ ಟಿಡಿಆರ್ ಪ್ರಕ್ರಿಯೆಗಳಿಂದ ವಿಳಂಬವಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ವಿಶೇಷ ಆದ್ಯತೆ ನೀಡಿ ಕಾರ್ಯನಿರ್ವಹಿಸಬೇಕು ಎಂದು ಆಯುಕ್ತರು ತಿಳಿಸಿದರು. ಸ್ವತ್ತಿನ ಮಾಲೀಕರೊಂದಿಗೆ ಅಗತ್ಯ ಸಮಾಲೋಚನೆ ನಡೆಸಿ, ನಿಯಮಾನುಸಾರ ಟಿಡಿಆರ್ ಅಥವಾ ಭೂಸ್ವಾಧೀನದ ಮೂಲಕ ಜಾಗ ಪಡೆಯುವ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು. ಕಂದಾಯ, ಟಿಡಿಆರ್ ಹಾಗೂ ಇತರೆ ಸಂಬಂಧಪಟ್ಟ ಇಲಾಖೆಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಬಾಕಿ ಇರುವ ಕಡತಗಳು ಹಾಗೂ ಅನುಮೋದನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚಿಸಿದರು.
*ಕಾಮಗಾರಿಗಳ ಗುಣಮಟ್ಟದಲ್ಲಿ ಯಾವುದೇ ರಾಜಿ ಬೇಡ*
ರಸ್ತೆ ಅಗಲೀಕರಣ, ವೈಟ್ಟಾಪಿಂಗ್, ಮಳೆನೀರು ಕಾಲುವೆ ಹಾಗೂ ಇತರ ಮೂಲಸೌಕರ್ಯ ಕಾಮಗಾರಿಗಳಲ್ಲಿನ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು ಎಂದು ಆಯುಕ್ತರು ಸ್ಪಷ್ಟಪಡಿಸಿದರು. ಕಾಮಗಾರಿಗಳ ಪ್ರಗತಿಯನ್ನು ಅಧಿಕಾರಿಗಳು ನಿಯಮಿತವಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ಕಾಮಗಾರಿಯ ಸಂದರ್ಭದಲ್ಲಿ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗದಂತೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಕಾಮಗಾರಿ ಪೂರ್ಣಗೊಂಡ ನಂತರ ಸಾರ್ವಜನಿಕರಿಗೆ ದೀರ್ಘಕಾಲೀನವಾಗಿ ಉಪಯೋಗವಾಗುವಂತೆ ಗುಣಮಟ್ಟವನ್ನು ಖಚಿತಪಡಿಸಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.
*ಸುಗಮ ಸಂಚಾರ ಮತ್ತು ಸಾರ್ವಜನಿಕ ಸುರಕ್ಷತೆಗೆ ಆದ್ಯತೆ*
ರಸ್ತೆ ಅಭಿವೃದ್ಧಿ ಮತ್ತು ಅಗಲೀಕರಣ ಕಾಮಗಾರಿಗಳ ಸಂದರ್ಭದಲ್ಲಿ ವಾಹನ ಹಾಗೂ ಪಾದಚಾರಿ ಸಂಚಾರಕ್ಕೆ ತೊಂದರೆಯಾಗುವಂತೆ ಕಾರ್ಯಯೋಜನೆ ರೂಪಿಸಬೇಕು. ಅಗತ್ಯವಿರುವ ಕಡೆ ಸಂಚಾರ ನಿರ್ವಹಣೆ, ಬ್ಯಾರಿಕೇಡಿಂಗ್ ಹಾಗೂ ಸುರಕ್ಷತಾ ವ್ಯವಸ್ಥೆಗಳನ್ನು ಕಲ್ಪಿಸಬೇಕು ಎಂದು ಸೂಚಿಸಿದರು.
ಅಭಿವೃದ್ಧಿ ಕಾಮಗಾರಿಗಳಿಂದ ಸಾರ್ವಜನಿಕರಿಗೆ ತಾತ್ಕಾಲಿಕವಾಗಿ ಉಂಟಾಗುವ ತೊಂದರೆಗಳನ್ನು ಕಡಿಮೆ ಮಾಡುವುದರ ಜೊತೆಗೆ, ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಉತ್ತಮ ಹಾಗೂ ಸುರಕ್ಷಿತ ರಸ್ತೆ ಮೂಲಸೌಕರ್ಯ ಒದಗಿಸುವುದು ಪ್ರಮುಖ ಆದ್ಯತೆಯಾಗಿರಬೇಕು ಎಂದು ತಿಳಿಸಿದರು.
*ಕಾಮಗಾರಿಗಳನ್ನು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಕಟ್ಟುನಿಟ್ಟಿನ ಸೂಚನೆ*
ಭೂಸ್ವಾಧೀನ, ಟಿಡಿಆರ್, ಕಂದಾಯ ಹಾಗೂ ಇತರೆ ಇಲಾಖೆಗಳ ಅನುಮೋದನೆಗಳ ಕಾರಣದಿಂದ ಯಾವುದೇ ಅಭಿವೃದ್ಧಿ ಕಾಮಗಾರಿ ಅನಗತ್ಯವಾಗಿ ವಿಳಂಬವಾಗಬಾರದು. ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ ಬಾಕಿ ಇರುವ ಪ್ರಕ್ರಿಯೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಆಯುಕ್ತರು ನಿರ್ದೇಶನ ನೀಡಿದರು.
“ಭೂಸ್ವಾಧೀನ ಹಾಗೂ ಟಿಡಿಆರ್ ಪ್ರಕ್ರಿಯೆಗಳು ಅಭಿವೃದ್ಧಿ ಕಾಮಗಾರಿಗಳಿಗೆ ಅಡ್ಡಿಯಾಗಬಾರದು. ಅಗತ್ಯ ಜಾಗವನ್ನು ನಿಯಮಾನುಸಾರ ತ್ವರಿತವಾಗಿ ಪಡೆದು, ಕಾಮಗಾರಿಗಳಿಗೆ ವೇಗ ನೀಡಬೇಕು. ಸಾರ್ವಜನಿಕರಿಗೆ ಸುರಕ್ಷಿತ, ಸುಗಮ ಹಾಗೂ ಉತ್ತಮ ಗುಣಮಟ್ಟದ ಮೂಲಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಅಧಿಕಾರಿಗಳು ನಿರಂತರವಾಗಿ ಸ್ಥಳ ಪರಿಶೀಲನೆ ನಡೆಸಿ ಕಾರ್ಯನಿರ್ವಹಿಸಬೇಕು” ಎಂದು ಆಯುಕ್ತರಾದ ಡಿ.ಎಸ್. ರಮೇಶ್ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಪೂರ್ವ ನಗರ ಪಾಲಿಕೆಯ ಅಪರ ಆಯುಕ್ತರು (ಅಭಿವೃದ್ಧಿ) ಲೋಖಂಡೆ ಸ್ನೇಹಲ್ ಸುಧಾಕರ್, ಟಿಡಿಆರ್ ವಿಭಾಗದ ಅಧಿಕಾರಿಗಳು, ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.