ಬೆಂಗಳೂರು : ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಅಪರ ಆಯುಕ್ತರು (ಅಭಿವೃದ್ಧಿ) ಕವಿತಾ ರಾಜಾರಾಂ ರವರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದರು.
2026 ಜೂನ್ 28 ರಿಂದ ಜುಲೈ 1 ರವರೆಗೆ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯಲಿದ್ದು, ಈ ಸಂಬಂಧ ಅಗತ್ಯ ಪ್ರಚಾರ, ಮಾಹಿತಿ ಕಾರ್ಯಕ್ರಮಗಳನ್ನು ಕೈಗೊಂಡು, ಕಾರ್ಯಕ್ರಮ ಯಶಸ್ವಿಯಾಗುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು. ಶೇ. 100 ಲಸಿಕಾಕರಣ ಸಾಧಿತವಾಗಬೇಕು ಎಂದು ಅಪರ ಆಯುಕ್ತರು ಸೂಚಿಸಿದರು.
“ನಮ್ಮ ಮುಂದಿನ ಪೀಳಿಗೆಯನ್ನು ಪೋಲಿಯೋದಿಂದ ರಕ್ಷಿಸಲು ಎಲ್ಲರ ಸಹಕಾರ ಅಗತ್ಯ. ದೊಡ್ಡ ದೇಶವಾಗಿರುವ ಭಾರತದಲ್ಲಿ ಪೋಲಿಯೋ ನಿರ್ಮೂಲನೆ ಯೋಜನೆ ಯಶಸ್ವಿಯಾಗಿರುವುದರ ಹಿಂದೆ ಎಲ್ಲ ವೈದ್ಯರು, ಸಿಬ್ಬಂದಿ ಹಾಗೂ ಎನ್ಜಿಒಗಳ ಪಾತ್ರವಿದೆ. ಈ ಬಾರಿಯ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿಯೂ ಪಾಲಿಕೆ ವ್ಯಾಪ್ತಿಯಲ್ಲಿ ಯಾವ ಅರ್ಹ ಮಗುವೂ ಪೋಲಿಯೋ ಲಸಿಕೆಯಿಂದ ವಂಚಿತವಾಗದಂತೆ ಖಚಿತಪಡಿಸಿಕೊಳ್ಳಬೇಕು” ಎಂದರು.
ನಗರ ಪ್ರದೇಶದಲ್ಲಿರುವುದರಿಂದ ಪಲ್ಸ್ ಪೋಲಿಯೋ ಕಾರ್ಯಕ್ರಮದ ಅನುಷ್ಠಾನಕ್ಕೆ ಸಾಧಕಗಳ ಜೊತೆಗೆ ಬಾಧಕಗಳೂ ಇವೆ. ಎಲ್ಲ ವ್ಯವಸ್ಥೆಗಳು ಇರುವುದು ಧನಾತ್ಮಕ ಅಂಶವಾದರೆ, ಲಸಿಕೆ ಬಗೆಗಿನ ನಿರ್ಲಕ್ಷ್ಯ ಅಥವಾ ಉದಾಸೀನದಂತಹ ಮನೋಭಾವ ಬಾಧಕವಾಗಬಹುದು. ಈ ನಿಟ್ಟಿನಲ್ಲಿ ಅಧಿಕಾರಿಗಳು, ಸಿಬ್ಬಂದಿ ವರ್ಗ ಲಸಿಕಾಕರಣ ಕಾರ್ಯಕ್ರಮವನ್ನು ಕರ್ತವ್ಯ ಮತ್ತು ಜವಾಬ್ದಾರಿಯೆಂದು ಭಾವಿಸಿ ಯಶಸ್ವಿಗೊಳಿಸಬೇಕು ಎಂದು ಸಲಹೆ ನೀಡಿದರು.
ವಿಶೇಷವಾಗಿ, ಕೊಳೆಗೇರಿಗಳು, ಕಟ್ಟಡ ನಿರ್ಮಾಣ ಸ್ಥಳಗಳಲ್ಲಿ ಶೇ.100ರಷ್ಟು ಲಸಿಕಾಕರಣ ಪೂರ್ಣಗೊಳ್ಳುವಂತೆ ಖಚಿತಪಡಿಸಿಕೊಳ್ಳಬೇಕು. ಲಸಿಕಾಕರಣದಲ್ಲಿ ಸ್ವಯಂಸೇವಕರು, ಎನ್.ಜಿ. ಓ ಗಳು, ವೈದ್ಯಕೀಯ ಕಾಲೇಜು, ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳ ನೆರವು ಪಡೆದುಕೊಳ್ಳಬೇಕು ಎಂದರು.
ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ ಕುರಿತಂತೆ ಐಇಸಿ (ಮಾಹಿತಿ, ಶಿಕ್ಷಣ, ಸಂವಹನ) ಕಾರ್ಯಕ್ರಮದಡಿಯಲ್ಲಿ ಮೆಟ್ರೋ, ರೈಲು ನಿಲ್ದಾಣ, ಬಸ್ಸು ನಿಲ್ದಾಣದಂತಹ ಹೆಚ್ಚು ಜನಸಂದಣಿ ಇರುವ ಪ್ರದೇಶಗಳಲ್ಲಿ ಮಾಹಿತಿ ಕಾರ್ಯಕ್ರಮ ಆಯೋಜಿಸಬೇಕು. ಮಾಹಿತಿ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಸರಕಾರಿ ಇಲಾಖೆಗಳ ನೆರವು ಪಡೆದುಕೊಳ್ಳಬೇಕು. ಎಫ್.ಎಂ ರೇಡಿಯೋ, ಕಸ ಸಂಗ್ರಹಣ ವಾಹನಗಳ ಮೂಲಕ ಪ್ರಚಾರ ಕಾರ್ಯ ಕೈಗೊಳ್ಳಬಹುದು. ನಿರ್ದಿಷ್ಟ ದಿನಗಳಂದು ಪ್ರಾರ್ಥನಾ ಮಂದಿರಗಳಲ್ಲಿ ಮಾಹಿತಿ ಕಾರ್ಯಕ್ರಮ ಆಯೋಜಿಸಬಹುದು ಎಂದರು.
ಶಾಲೆಗಳಲ್ಲಿ ಮೂರು ದಿನ ಮುಂಚಿತವಾಗಿ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮ ಇತ್ಯಾದಿ ಪೂರಕ ಚಟುವಟಿಕೆಗಳನ್ನು ಆಯೋಜಿಸಬೇಕು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ, ಆರೋಗ್ಯಾಧಿಕಾರಿ ಡಾ. ಮನೋರಂಜನ್ ಹೆಗ್ಡೆ, ಇನ್ನಿತರ ಸಂಬಂಧಿಸಿದ ಅಧಿಕಾರಿಗಳು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹಾಜರಿದ್ದರು.