ಬೆಂಗಳೂರು: ಕರ್ನಾಟಕ ವಿಧಾನಸಭೆಯ ಉಪ ಸಭಾಪತಿಯಾಗಿ ಅವಿರೋಧವಾಗಿ ಆಯ್ಕೆಯಾದ ಭಟ್ಕಳ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ಮಂಕಾಳು ವೈದ್ಯ ಅವರನ್ನು ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ಯಮಗಳ ಇಲಾಖೆ ಸಚಿವ ವಿಜಯಾನಂದ ಕಾಶಪ್ಪನವರ್ ಅಭಿನಂದಿಸಿದ್ದಾರೆ.
ಮಂಕಾಳು ವೈದ್ಯರು ಸದನದ ಘನತೆ, ಗೌರವ ಮತ್ತು ಸಂಸದೀಯ ಸಂಪ್ರದಾಯಗಳನ್ನು ಕಾಪಾಡಿಕೊಂಡು ಉಪ ಸಭಾಪತಿ ಸ್ಥಾನದ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ತಳಮಟ್ಟದಿಂದ ಬಂದ ಹಿಂದುಳಿದ ಸಮುದಾಯದ ಮುಖಂಡರೊಬ್ಬರು ವಿಧಾನಸಭೆಯಂತಹ ಅತ್ಯುನ್ನತ ಪ್ರಜಾಸತ್ತಾತ್ಮಕ ವೇದಿಕೆಯ ಪ್ರಮುಖ ಸ್ಥಾನಕ್ಕೇರಿರುವುದು ಸಮುದಾಯದ ದೃಷ್ಟಿಯಿಂದ ಗೌರವದ ಸಂಗತಿ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಹಿಂದುಳಿದ ವರ್ಗಗಳು, ಶೋಷಿತರು ಮತ್ತು ಅಂಚಿನ ಸಮುದಾಯಗಳಿಗೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವಲ್ಲಿ ಕಾಂಗ್ರೆಸ್ ಪಕ್ಷದ ಪಾತ್ರವನ್ನು ಈ ಬೆಳವಣಿಗೆ ಮತ್ತೊಮ್ಮೆ ತೋರಿಸುತ್ತದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.