LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಗರ್ ಹುಕುಂʼ ಅಡಿಯಲ್ಲಿ ಅರ್ಹ ರೈತರಿಗೆ ಭೂ ಮಂಜೂರು ನಿರೀಕ್ಷೆಯ ಮಟ್ಟ ತಲುಪಿಲ್ಲ: ಸಚಿವ ಕೃಷ್ಣ ಬೈರೇಗೌಡ ಬೇಸರ

ಬೆಂಗಳೂರು : ಬಗರ್ ಹುಕುಂ ಬಡವರ ಕೆಲಸ. ಸಾವಿರಾರು ಬಡವರು ಅರ್ಜಿ ಹಾಕಿ ಕಾದು ಕುಳಿತಿದ್ದಾರೆ. ಈ ವಿಚಾರದಲ್ಲಿ ಹಲವು ತಹಶೀಲ್ದಾರರ ಶ್ರಮ ಶ್ಲಾಘನೀಯ. ಆದರೂ, ನಿರೀಕ್ಷೆಯ ಮಟ್ಟ ತಲುಪಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಬೇಸರ ವ್ಯಕ್ತಪಡಿಸಿದರು.

ವಿಕಾಸಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ತಹಶೀಲ್ದಾರರುಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, “ಬಗರ್ ಹುಕುಂ ಕೆಲಸಗಳಿಗೆ ಚುರುಕು ಮುಟ್ಟಿಸಬೇಕು ಎಂಬ ಕಾರಣದಿಂದಲೇ ನಾನು ಕಳೆದ ಎರಡು ವರ್ಷಗಳಿಂದ ವ್ಯಯಕ್ತಿಕವಾಗಿ ಎಲ್ಲಾ ಜಿಲ್ಲೆಗಳಿಗೂ ಪ್ರವಾಸ ಕೈಗೊಂಡು ಪ್ರಗತಿ ಪರಿಶೀಲನಾ ಸಭೆ ನಡೆಸುತ್ತಿದ್ದೇನೆ. ರಾಜ್ಯದ ಎಲ್ಲಾ ತಹಶೀಲ್ದಾರರ ಜೊತೆ ಪ್ರತಿ ತಿಂಗಳೂ ವಿಡಿಯೋ ಕಾನ್ಫರೆನ್ಸ್ ಮೂಲಕವೂ ಸಭೆ ನಡೆಸಿ ಪ್ರಗತಿ ಪರಿಶೀಲಿಸುತ್ತಿದ್ದೇನೆ. ಪರಿಣಾಮ ಹಲವು ಜಿಲ್ಲೆಗಳಲ್ಲಿ ಅಧಿಕಾರಿಗಳು ನಿರೀಕ್ಷೆಗೂ ಮೀರಿ ಉತ್ತಮ ಕೆಲಸ ನಿರ್ವಹಿಸುತ್ತಿದ್ದಾರೆ. ಆದರೆ, ಕೆಲವು ಅಧಿಕಾರಿಗಳು ಬಡವರ ಕೆಲಸದ ಬಗ್ಗೆ ಅಸಡ್ಡೆ ಧೋರಣೆ ತೋರುತ್ತಿದ್ದು, ಅವರೂ ಸಹ ಶೀಘ್ರ ಎಚ್ಚೆತ್ತುಕೊಳ್ಳಬೇಕಿದೆ” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಕಿವಿಮಾತು ಹೇಳಿದರು.

“ರಾಜ್ಯದ ಬಹುತೇಕ ಎಲ್ಲಾ ತಾಲೂಕುಗಳಲ್ಲೂ ಬಗರ್ ಹುಕುಂ ಕಮಿಟಿ ರಚಿಸಲಾಗಿದೆ. ಈ ಹಂತದಲ್ಲಿ ಅರ್ಜಿಯೊಂದು ಗ್ರಾಮ ಆಡಳಿತ ಅಧಿಕಾರಿಯಿಂದ ತಹಶೀಲ್ದಾರರ ಎದುರು ಬಂದಿದೆ ಎಂದರೆ ಆ ಅರ್ಜಿ ಬಹುತೇಕ ಅರ್ಹ ಅರ್ಜಿಯೇ ಆಗಿರುತ್ತದೆ. ಹೀಗಾಗಿ ಅಧಿಕಾರಿಗಳು ಪ್ರತಿ 15 ದಿನಗಳಿಗೊಮ್ಮೆ ಸ್ಥಳೀಯ ಶಾಸಕರ ನೇತೃತ್ವದಲ್ಲಿ ಸಭೆ ನಡೆಸಿ ಅರ್ಹರಿಗೆ ಜಮೀನು ಮಂಜೂರು ಮಾಡಿ, ಬಡವರು ನಿಮ್ಮನ್ನು ನೆನೆಸಿಕೊಳ್ಳುತ್ತಾರೆ” ಎಂದರು.

“ಬಗರ್ ಹುಕುಂ ವಿಚಾರದಲ್ಲಿ ಕೆಲವು ಅಧಿಕಾರಿಗಳು ನಿಜಕ್ಕೂ ಆಮೆ ಗತಿಯಲ್ಲಿ ಕೆಲಸ ಮಾಡುತ್ತಿದ್ದೀರಿ. ಇದು ಸರಿಯಲ್ಲ. ಅಧಿಕಾರಿಗಳು ಮಾಡುವ ತಪ್ಪಿನಿಂದಾಗಿ ಸದನದಲ್ಲಿ ನಾವು ಉತ್ತರ ನೀಡಬೇಕಾದ ಪರಿಸ್ಥಿತಿ ಎದುರಾಗಿದೆ. ಅಲ್ಲದೆ, ಅಧಿವೇಶನ ನಡೆಯುವ ಸಂದರ್ಭದಲ್ಲೇ ರೈತರು ಸ್ವಾತಂತ್ರ್ಯ ಉದ್ಯಾನದಲ್ಲಿ ಹೋರಾಟಕ್ಕೆ ಮುಂದಾಗುತ್ತಾರೆ. ನಿಮ್ಮಿಂದಾಗಿ ನಾವು ರೈತರ ಎದುರು ತಲೆ ತಗ್ಗಿಸಿ ನಿಲ್ಲಬೇಕಾದಂತಹ ಸ್ಥಿತಿ ಎದುರಾಗಿದೆ. ಹೀಗಾಗಿ ಈಗಲಾದರೂ ಬಗರ್ ಹುಕುಂ ಕೆಲಸಗಳನ್ನು ಚುರುಕಾಗಿಸಿ ಮುಂದಿನ ಆರು ತಿಂಗಳಲ್ಲಿ ಎಲ್ಲಾ ಅರ್ಹರಿಗೂ ಜಮೀನು ಮಂಜೂರು ಮಾಡಿ” ಎಂದು ಸಮಯದ ಗಡುವು ನೀಡಿದರು.

*ಪೋಡಿ ದುರಸ್ಥಿಗೂ ಚುರುಕು ಮುಟ್ಟಿಸಲು ಸೂಚನೆ:*

ರಾಜ್ಯಾದ್ಯಂತ ಪೋಡಿ ದುರಸ್ಥಿ ಅಭಿಯಾನಕ್ಕೆ ಚಾಲನೆ ನೀಡಿದ್ದರೂ ಈ ಕೆಲಸ ನಿರೀಕ್ಷಿತ ವೇಗ ಪಡೆದಿಲ್ಲ ಎಂದು ತಹಶೀಲ್ದಾರರ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಅವರು ಅಸಮಾಧಾನ ಹೊರಹಾಕಿದರು.

ದಶಕಗಳ ಹಿಂದೆಯೇ ಸರ್ಕಾರ ಬಡ ರೈತರಿಗೆ ಜಮೀನು ಮಂಜೂರು ಮಾಡಿದೆ. ಆದರೆ, ನಾನಾ ಕಾರಣಗಳಿಂದ ಜಮೀನು ದುರಸ್ಥಿಯಾಗದೆ ಲಕ್ಷಾಂತರ ರೈತರು ಸಂಕಷ್ಟಕ್ಕೆ ಒಳಗಾಗಬೇಕಾದ ಸ್ಥಿತಿ ಇದೆ. ರೈತರು ತಮ್ಮ ಪಾಲಿನ ಜಮೀನು ಇದ್ದರೂ ಸಹ ಅದರ ಪೋಡಿಯಾಗದೆ ಸರ್ಕಾರಿ ಕಚೇರಿಗಳಿಗೆ ಸುತ್ತುವುದು ಪರಿಪಾಟವಾಗಿದೆ. ಹೀಗಾಗಿಯೇ ಪೋಡಿ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ನಮೂನೆ 1-5 ಹಾಗೂ 6-10 ಪ್ರಕ್ರಿಯೆಯನ್ನು ಸರಳೀಕರಣಗೊಳಿಸಲಾಗಿತ್ತು.

ನಿಯಮದಂತೆ ತಹಶೀಲ್ದಾರರು ನಿಗದಿತ ಜಮೀನಿಗೆ ಸಂಬಂಧಿಸಿದ ನಮೂನೆ 1-5 ದಾಖಲೆಯನ್ನು ಸಿದ್ದಪಡಿಸಿ ಮುಂದಿನ ಹಂತಕ್ಕೆ ನಮೂನೆ 6-10 ಕೆಲಸಕ್ಕಾಗಿ ಭೂ ಮಾಪನ ಇಲಾಖೆಗೆ ಕಡತ ಕಳುಹಿಸಬೇಕು. ಆದರೆ, ಬಹುತೇಕ ಜಿಲ್ಲೆಗಳಲ್ಲಿ ಈ ಸಂಖ್ಯೆ ಸಮಾಧಾನಕರವಾಗಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಸಮಾಧಾನ ಹೊರಹಾಕಿದರು.

ಇದೇ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೋಡಿ ದುರಸ್ಥಿ ಕೆಲಸ ಚುರುಕುಗೊಂಡಿರುವ ಬಗ್ಗೆ ಅಧಿಕಾರಿಗಳ ಶ್ರಮಕ್ಕೆ ಪ್ರಶಂಸೆ ವ್ಯಕ್ತಪಡಿಸಿದ ಅವರು, ಮುಂದಿನ ತಿಂಗಳು ಮುಖ್ಯಮಂತ್ರಿಗಳು ಮಂಗಳೂರಿಗೆ ಆಗಮಿಸುತ್ತಿದ್ದು, ಅಷ್ಟರಲ್ಲಿ ಕನಿಷ್ಟ 10,000 ಪ್ರಕರಣಗಳು ದುರಸ್ಥಿಗೊಂಡು ರೈತರಿಗೆ ದಾಖಲೆ ನೀಡಬೇಕು” ಎಂದು ತಹಶೀಲ್ದಾರರಿಗೆ ಗುರಿ ನಿಗದಿಪಡಿಸಿದರು.

*ಭೂ ದಾಖಲೆ ಸ್ಕ್ಯಾನಿಂಗ್ ಬಗ್ಗೆಯೂ ಅಸಮಾಧಾನ:*

ರಾಜ್ಯದ ಎಲ್ಲಾ ತಹಶೀಲ್ದಾರ್ ಕಚೇರಿಗಳಲ್ಲಿರುವ ಭೂ ದಾಖಲೆಗಳನ್ನು ಈಗಾಗಲೇ ಅಭಿಯಾನ ಮಾದರಿಯಲ್ಲಿ ಸ್ಕ್ಯಾನ್ ಮಾಡಿ ಡಿಜಿಟಲೀಕರಣಗೊಳಿಸಲಾಗುತ್ತಿದೆ. ಆದರೆ, ಈ ಕೆಲಸದಲ್ಲೂ ಅಸಡ್ಡೆ ತೋರಿರುವ ಕೆಲ ತಹಶೀಲ್ದಾರರಿಗೆ ನೊಟೀಸ್ ನೀಡುವ ಬಗ್ಗೆ ಸಚಿವರು ಸಭೆಯಲ್ಲಿ ಎಚ್ಚರಿಕೆ ನೀಡಿದರು.

ಈ ಬಗ್ಗೆ ಮಾತನಾಡಿದ ಅವರು, “ಭೂ ದಾಖಲೆಗಳ ಕಳವು ಮತ್ತು ತಿದ್ದುವಂತಹ ಕೃತ್ಯಗಳಿಂದ ಬಡ ರೈತರು ಶೋಷಣೆಗೆ ಒಳಗಾಗುತ್ತಿದ್ದಾರೆ. ಇಂತಹ ಪ್ರಸಂಗಗಳಿಗೆ ಶಾಶ್ವತ ಪರಿಹಾರ ನೀಡುವ ನಿಟ್ಟಿನಲ್ಲಿ ಭೂ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಲು ಸರ್ಕಾರ ಮುಂದಾಯಿತು. ಮೊದಲು 31 ತಾಲೂಕುಗಳಲ್ಲಿ ಪ್ರಾಯೋಗಿಕವಾಗಿ ಈ ಯೋಜನೆಯನ್ನು ಜಾರಿಗೊಳಿಸಿ ಇದೀಗ ಎಲ್ಲಾ ತಾಲೂಕುಗಳಲ್ಲೂ ದಾಖಲೆಗಳ ಸ್ಕ್ಯಾನ್ಗೆ ಒತ್ತು ನೀಡಲಾಗಿದೆ. ದಾಖಲೆಗಳ ಡಿಜಿಟಲೀಕರಣಕ್ಕೆ ಸಹಾಯವಾಗಲಿ ಎಂಬ ಕಾರಣಕ್ಕೆ ರಾಜ್ಯದ ಎಲ್ಲಾ ತಹಶೀಲ್ದಾರ್ ಕಚೇರಿಗಳಿಗೆ ಅಗತ್ಯ ಸ್ಕ್ಯಾನರ್ಗಳ ಜೊತೆಗೆ ತಲಾ ಆರು ಕಂಪ್ಯೂಟರ್ ಗಳನ್ನೂ ನೀಡಲಾಗಿದೆ. ಇದರ ಜೊತೆಗೆ ಆರು ಜನ ಡಾಟಾ ಎಂಟ್ರಿ ಆಪರೇಟರ್ಗಳಿಗೂ ಸರ್ಕಾರವೇ ವೇತನ ನೀಡುತ್ತಿದೆ. ಆದರೆ, ಇಷ್ಟೆಲ್ಲಾ ಸೌಲಭ್ಯ ಒದಗಿಸಿಯೂ ಕೆಲ ತಹಶೀಲ್ದಾರರು ಗುರಿ ಮುಟ್ಟುವಲ್ಲಿ ವಿಫಲವಾಗಿರುವುದು ಬೇಸರದ ಸಂಗತಿ” ಎಂದರು.

ಮುಂದುವರೆದು, “ಈ ಹಿಂದೆ ಪ್ರತಿಯೊಂದು ತಹಶೀಲ್ದಾರ್ ಕಚೇರಿಗೂ ದಿನಕ್ಕೆ 6,000 ಪುಟಗಳನ್ನು ಸ್ಕ್ಯಾನ್ ಮಾಡುವ ಗುರಿ ನೀಡಲಾಗಿತ್ತು. ಆದರೆ, ಹಲವು ಕಚೇರಿಗಳಲ್ಲಿ ಸರಾಸರಿ 2,000 ಪುಟಗಳನ್ನೂ ಸಹ ಸ್ಕ್ಯಾನ್ ಮಾಡಲಾಗುತ್ತಿಲ್ಲ. ಇದೇ ಸಂದರ್ಭದಲ್ಲಿ ಚಳ್ಳಕೆರೆ, ಮೊಳಕಾಲ್ಮೂರು, ಕೊಪ್ಪ, ಕೊಪ್ಪಳ, ಹೊನ್ನಾವರ ಕಚೇರಿಗಳಲ್ಲಿ 9,000 ಸ್ಕ್ಯಾನ್ ಮಾಡಲಾಗುತ್ತಿದೆ. ಕೆಲವರಿಂದ ನಮ್ಮ ಗುರಿಯನ್ನೂ ಮೀರಿ ಕೆಲಸ ಮಾಡಲಾಗುತ್ತೆ, ಕೆಲವರಿಗೆ ಆಗಲ್ಲ ಎಂದರೆ ಏನರ್ಥ? ಎಂದು ಸಚಿವರು ಆಕ್ರೋಶ ಹೊರಹಾಕಿದರು.

“ರಾಜ್ಯಾದ್ಯಂತ ತಹಶೀಲ್ದಾರ್ ಕಚೇರಿಗಳ ರೆಕಾರ್ಡ್‌ ರೂಮ್‌ಗಳಲ್ಲಿ 3.6 ಕೋಟಿ ಕಡತಗಳು ಇವೆ. ಈ ಪೈಕಿ ಈಗಾಗಲೇ 26.42 ಲಕ್ಷ ಕಡತಗಳನ್ನು ಸ್ಕ್ಯಾನ್ ಮಾಡಿ ದಾಖಲೆಗಳ ಅಸಲಿಯತ್ತನ್ನು ಪರಿಶೀಲಿಸಿ ಸಾರ್ವಜನಿಕ ಡೊಮೈನ್ನಲ್ಲಿ ಅಪ್ಲೋಡ್ ಮಾಡಲಾಗಿದೆ. ಉಳಿದ ಕಡತಗಳನ್ನೂ ಈ ವರ್ಷಾಂತ್ಯದೊಳಗೆ ಅಭಿಯಾನ ಮಾದರಿ ಸ್ಕ್ಯಾನ್ ಮಾಡಿ ಡಿಜಿಟಲೀಕರಿಸಬೇಕು” ಎಂದು ಎಚ್ಚರಿಸಿದರು.

*ಕೋರ್ಟ್ ಕೇಸ್ ಪ್ರಗತಿ ಕಾಯ್ದುಕೊಳ್ಳಲು ತಾಕೀತು*

ನಿಗದಿತ ಸಮಯದೊಳಗೆ ತಹಶೀಲ್ದಾರ್ ನ್ಯಾಯಾಲಯಗಳಲ್ಲಿರುವ ಪ್ರಕರಣಗಳನ್ನು ಇತ್ಯರ್ಥಗೊಳಿ ಪ್ರಗತಿಯನ್ನು ಕಾಯ್ದುಕೊಳ್ಳಿ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಸಭೆಯಲ್ಲಿ ಈ ಬಗ್ಗೆ ಗಮನ ಸೆಳೆದ ಅವರು “ತಕರಾರು ಪ್ರಕರಣಗಳನ್ನು ತಹಶೀಲ್ದಾರ್ ನ್ಯಾಯಾಲಯಗಳು 90 ದಿನಗಳಲ್ಲಿ ಇತ್ಯರ್ಥಪಡಿಸಬೇಕು ಎಂಬ ನಿಯಮವಿದೆ. ಆದರೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಅವಧಿ ಮೀರಿದ 10,774 ಪ್ರಕರಣಗಳಿದ್ದವು. ಪ್ರಸ್ತುತ ಈ ಸಂಖ್ಯೆಯನ್ನು 369ಕ್ಕೆ ಇಳಿಸಲಾಗಿದೆ. ಈ ಹಿಂದೆ ಪ್ರತಿ ಪ್ರಕರಣಗಳ ಇತ್ಯರ್ಥಕ್ಕೆ ತಹಶೀಲ್ದಾರ್ ನ್ಯಾಯಾಲಯಗಳಲ್ಲಿ ಸರಾಸರಿ 7 ತಿಂಗಳಿಗಿಂತ ಹೆಚ್ಚು ಸಮಯ ವ್ಯಯವಾಗುತ್ತಿತ್ತು. ಕಳೆದ ಎರಡು ವರ್ಷಗಳಿಂದ ಸತತ ಪ್ರಯತ್ನದಿಂದ ಈ ಅವಧಿಯನ್ನು 64 ದಿನಕ್ಕೆ ಇಳಿಸಲಾಗಿತ್ತು. ಆದರೆ, ಇದೀಗ ಈ ಅವಧಿ ಮತ್ತೆ 73 ದಿನಕ್ಕೆ ಏರಿದೆ” ಎಂದರು.

ಮುಂದುವರೆದು, “ಕಂದಾಯ ಇಲಾಖೆಯಲ್ಲಿ ಒಳ್ಳೆಯ ಕೆಲಸಗಳಾಗುತ್ತಿವೆ ಎಂಬ ಮಾತು ಜನರ ನಡುವಿನಿಂದಲೇ ಕೇಳಿಬರುತ್ತಿದೆ. ಆದರೆ, ಇಂತಹ ಸಂದರ್ಭದಲ್ಲಿ ಹಲವು ತಹಶೀಲ್ದಾರರು ಅವಧಿ ಮೀರಿಯೂ ಕೆಲ ಪ್ರಕರಣಗಳನ್ನು ವಿಲೇವಾರಿಗೊಳಿಸದಿರುವುದು ಕೆಟ್ಟ ಸಂದೇಶ ರವಾನಿಸುತ್ತದೆ. ನ್ಯಾಯಾಲಯಗಳಲ್ಲಿರುವ ಪ್ರಕರಣಗಳ ಇತ್ಯರ್ಥ ವಿಚಾರದಲ್ಲಿ ಪ್ರಗತಿ ಸಾಧಿಸಿ ಮತ್ತೆ ನಕಾರಾತ್ಮಕ ದಾರಿ ಹಿಡಿದಿರುವುದು ಸರಿಯಲ್ಲ. ಅಲ್ಲದೆ, ಈ ವಿಚಾರವಾಗಿ ಅಧಿಕಾರಿಗಳು ಪದೇ ಪದೇ ಹೇಳಿಸಿಕೊಳ್ಳುವುದು ಶೋಭೆ ತರುವುದಿಲ್ಲ” ಎಂದು ಅಭಿಪ್ರಾಯಪಟ್ಟರು.

ಸಭೆಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟಾರಿಯಾ ಹಾಗೂ ಕಂದಾಯ ಆಯುಕ್ತರಾದ ಸುನೀಲ್ ಕುಮಾರ್ ಉಪಸ್ಥಿತರಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ