ಬೆಂಗಳೂರು: ಹಿಂದೂ ಧರ್ಮ, ಪ್ರಭು ಶ್ರೀರಾಮ, ಶ್ರೀಕೃಷ್ಣ, ಭಗವದ್ಗೀತೆ ಹಾಗೂ ಹಿಂದೂ ಧಾರ್ಮಿಕ ನಂಬಿಕೆಗಳ ಕುರಿತು ಅವಹೇಳನಕಾರಿ ಮತ್ತು ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿರುವ ಪ್ರೊ. ಕೆ. ಎಸ್. ಭಗವಾನ್ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿಯು ಕರ್ನಾಟಕ ರಾಜ್ಯದ ಪೊಲೀಸ್ ಮಹಾನಿರ್ದೇಶಕರು ಹಾಗೂ ಪೊಲೀಸ್ ಮಹಾನಿರೀಕ್ಷಕರಿಗೆ (DGP & IGP) ಅಧಿಕೃತ ದೂರು ಸಲ್ಲಿಸಿದೆ.
ಹಿಂದೂ ಜನಜಾಗೃತಿ ಸಮಿತಿ ಕರ್ನಾಟಕ ವಿಭಾಗದ ವಕ್ತಾರ ಮೋಹನ್ ಗೌಡ ಮಾತನಾಡಿ, ಜೂನ್ 9 ರಂದು ದಾವಣಗೆರೆ ಜಿಲ್ಲೆಯ ಹರಿಹರದಲ್ಲಿರುವ ಬಿ. ಕೃಷ್ಣಪ್ಪ ಮೈತ್ರಿವನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರೊ. ಕೆ. ಎಸ್. ಭಗವಾನ್ ಅವರು ಪ್ರಭು ಶ್ರೀರಾಮ ಹಾಗೂ ಹಿಂದೂ ಧಾರ್ಮಿಕ ಪರಂಪರೆಗಳ ಕುರಿತು ಅವಹೇಳನಕಾರಿ ಮತ್ತು ವಿವಾದಾತ್ಮಕ ಹೇಳಿಕೆಗಳನ್ನು ನೀಡಿರುವುದು ಕೋಟ್ಯಂತರ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯನ್ನುಂಟುಮಾಡಿದೆ ಎಂದು ಸಮಿತಿಯು ದೂರಿನಲ್ಲಿ ತಿಳಿಸಿದೆ.
ಹಿಂದೂ ಜನಜಾಗೃತಿ ಸಮಿತಿಯ ವಕ್ತಾರರಾದ ಮೋಹನ್ ಗೌಡ ಅವರು ಮಾತನಾಡಿ, “ಪ್ರೊ. ಕೆ. ಎಸ್. ಭಗವಾನ್ ಅವರು ಈ ಹಿಂದೆಯೂ ಅನೇಕ ಬಾರಿ ಹಿಂದೂ ದೇವತೆಗಳು, ಧರ್ಮಗ್ರಂಥಗಳು ಹಾಗೂ ಹಿಂದೂ ನಂಬಿಕೆಗಳ ಕುರಿತು ಅವಮಾನಕಾರಿಯಾಗಿ ಮಾತನಾಡಿದ್ದು ರಾಜ್ಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು. ಆದಾಗ್ಯೂ ಅವರು ಪುನಃ ಪುನಃ ಇದೇ ರೀತಿಯ ಹೇಳಿಕೆಗಳನ್ನು ನೀಡುತ್ತಿರುವುದು ಉದ್ದೇಶಪೂರ್ವಕವಾಗಿದ್ದು, ಸಮಾಜದಲ್ಲಿ ಅಶಾಂತಿ ಮತ್ತು ವೈಮನಸ್ಸು ಸೃಷ್ಟಿಸುವ ಸಾಧ್ಯತೆಯನ್ನು ಹೊಂದಿದೆ” ಎಂದು ಹೇಳಿದರು.
ದೂರಿನಲ್ಲಿ ಪ್ರೊ. ಕೆ. ಎಸ್. ಭಗವಾನ್ ಅವರ ಭಾಷಣದ ಸಂಪೂರ್ಣ ವಿಡಿಯೋ, ಧ್ವನಿಮುದ್ರಣ ಹಾಗೂ ಇತರೆ ಸಾಕ್ಷ್ಯಗಳನ್ನು ಪರಿಶೀಲಿಸಿ, ಅನ್ವಯವಾಗುವ ಕಾನೂನು ವಿಧಿಗಳಡಿ ಎಫ್ಐಆರ್ ದಾಖಲಿಸಿ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಮನವಿ ಮಾಡಲಾಗಿದೆ.
“ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಹಿಂದೂ ಧರ್ಮ, ದೇವತೆ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಹೇಳನ ಮಾಡುವುದನ್ನು ಸಹಿಸಲಾಗುವುದಿಲ್ಲ. ಎಲ್ಲಾ ಧರ್ಮಗಳಿಗೆ ಸಮಾನ ಗೌರವ ಮತ್ತು ಕಾನೂನು ರಕ್ಷಣೆ ದೊರೆಯಬೇಕು” ಎಂದು ಹಿಂದೂ ಜನಜಾಗೃತಿ ಸಮಿತಿಯು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.